ಬೆಂಗಳೂರು

ನಾನು ಮುಖ್ಯಮಂತ್ರಿಯಾಗುವುದಿಲ್ಲ.! ಸ್ವತಃ ಮುಖ್ಯಮಂತ್ರಿ ಸದನದಲ್ಲಿ ಘೋಷಣೆ

ವಿಧಾನಸೌಧ(ಬೆಂಗಳೂರು):- ಮುಂದಿನ (2028ರ) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ, ನಾನು ಮುಖ್ಯಮಂತ್ರಿಯಾಗುವುದಿಲ್ಲ.! ಹೀಗೆಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಘೋಷಿಸಿದ್ದಾರೆ. ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುವ ವೇಳೆ ಶುಕ್ರವಾರ ಮಾತನಾಡಿದ ಅವರು, ‘2028ರಲ್ಲಿ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ.

ಇದು ನೂರಕ್ಕೆ ನೂರರಷ್ಟು ಸತ್ಯ. ಆದರೆ, ಮುಂದಿನ ಅವಧಿಗೆ ನಾನು ಮುಖ್ಯಮಂತ್ರಿ ಆಗುವುದಿಲ್ಲ. ಇನ್ನು ಜೆಡಿಎಸ್‌ 2-3 ಸ್ಥಾನ ಬಂದರೆ ಅದೇ ಹೆಚ್ಚು. ಹೀಗಾಗಿ ಜೆಡಿಎಸ್‌ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಲಿ’ ಎಂದು ಲೇವಡಿ ಮಾಡಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯಾಗಲಿ, ಜೆಡಿಎಸ್‌ ಆಗಲಿ, ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಯತ್ನಾಳ್‌ ಹೊಸ ಪಕ್ಷ ಮಾಡಿದರೆ ಆ ಸಾಧ್ಯತೆ ಇದ್ದರೂ ಇರಬಹುದು ಎಂದು ಇದೇ ವೇಳೆ ಕಾಲೆಳೆದರು. ಬಹುಮತ ಕೊರತೆ ಉಂಟಾದರೆ ನಮ್ಮನ್ನು ಕೇಳಲ್ಲವೇ ಎಂಬ ಜೆಡಿಎಸ್‌ ನಾಯಕ ಸುರೇಶ್‌ ಬಾಬು ಪ್ರಶ್ನೆಗೆ, ನೀವು ಬಿಜೆಪಿ ಜತೆ ಯಾವಾಗ ಸೇರಿಕೊಂಡರೋ ಆಗ ನೀವು ಒಂಥರಾ ಅಸ್ಪೃಶ್ಯರ ರೀತಿ ಆಗಿದ್ದೀರಿ. ನಿಮಗೆ ಯಾವುದೇ ಸಿದ್ಧಾಂತವಿಲ್ಲ. ಜೆಡಿಎಸ್‌ ಪಕ್ಷ ಕಟ್ಟಿದವನು, ಅಧ್ಯಕ್ಷನಾದವನು ನಾನು. ಆ ಪಕ್ಷದಿಂದ ನಾನು ಅಧ್ಯಕ್ಷನಾಗಿದ್ದಾಗ 59 ಸ್ಥಾನ ಗೆದ್ದಿದ್ದೆವು. ಈಗ 18ಕ್ಕೆ ಬಂದಿದ್ದೀರಿ, ಮುಂದಿನ ಸಲ 2-3 ಅಷ್ಟೇ. ನೀವು ಬಿಜೆಪಿ ಜತೆ ವಿಲೀನ ಆದರೂ ಆಗಬಹುದು. ವಿಲೀನಕ್ಕೆ ದೇವೇಗೌಡರಿಗೆ ಸಲಹೆ ನೀಡಿ ಎಂದು ಸಿದ್ದರಾಮಯ್ಯ ಕಿಚಾಯಿಸಿದರು.

ನಾನು ಮುಂದಿನ ಬಾರಿ ಮುಖ್ಯಮಂತ್ರಿ ಆಗುವುದಿಲ್ಲ, ಹಾಗಂತ ನೀವೂ ಆಗಲ್ಲ. ನಮ್ಮ ಮತಗಳು ನಿಮಗೆ ಬರಲು ಸಾಧ್ಯವೇ ಇಲ್ಲ. ನೀವು ಎಸ್ಸಿ,ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರ ವಿರೋಧಿಗಳು ಎಂದರು.

ಆಗ ಯತ್ನಾಳ್‌, ನಾನ್‌ ಅಡ್ಜಸ್ಟ್‌ಮೆಂಟ್‌ ರಾಜಕೀಯ ಪಕ್ಷ ಮಾಡುತ್ತೇನೆ. ನಾನು ಎಸ್ಸಿ,ಎಸ್ಟಿ, ಒಬಿಸಿ ವಿರೋಧಿಯಲ್ಲ. ದೇಶದ್ರೋಹಿಗಳ ವಿರೋಧಿ. ಟೋಪಿ ಹಾಕಿದವರ ಓಟು ಬೇಡ ಎಂದಿರುವುದು ನಿಜ. ಅದನ್ನು ಈಗಲೂ ಹೇಳುತ್ತೇನೆ ಎಂದರು.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video